
ಬೆಲೆ ಏರಿಕೆಯೇ ಸಿದ್ದರಾಮಯ್ಯ ಸರಕಾರದ 6ನೇ ಗ್ಯಾರಂಟಿ: ಬಿ.ವೈ.ವಿಜಯೇಂದ್ರ
ಯಾದಗಿರಿ : ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಬಡವರು ಪರದಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ. ವಿಜಯೇಂದ್ರ ಅವರು ಎಂದು ಅವರು ತಿಳಿಸಿದ್ದಾರೆ.
ಇಂದು ಇಲ್ಲಿ ಜನಾಕ್ರೋಶ ಯಾತ್ರೆ ಸಂಬಂಧ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು 5 ಗ್ಯಾರಂಟಿಗಳನ್ನು ಕೊಟ್ಟಿದ್ದು, 6ನೇ ಗ್ಯಾರಂಟಿಗೆ ಹೆಚ್ಚು ಪ್ರಚಾರ ಕೊಟ್ಟಿಲ್ಲ; ಅದುವೇ ಬೆಲೆ ಏರಿಕೆಯ ಗ್ಯಾರಂಟಿ ಎಂದು ವ್ಯಂಗ್ಯವಾಡಿದರು. ರಾಜ್ಯದ ಕಾಂಗ್ರೆಸ್ ಸರಕಾರವು 50ಕ್ಕೂ ಹೆಚ್ಚು ಅಗತ್ಯ ವಸ್ತುಗಳ ಬೆಲೆ ಏರಿಸಿದ್ದರಿಂದ ಜನಸಾಮಾನ್ಯರು, ರೈತರು, ಬಡವರು ಜೀವನ ಸಾಗಿಸುವುದೇ ಕಷ್ಟವಾಗಿದೆ ಎಂದು ಟೀಕಿಸಿದರು.
ಉಗ್ರರ ವಿರುದ್ಧ ಪ್ರಧಾನಿಯವರ ದಿಟ್ಟ ಕ್ರಮದ ವಿಶ್ವಾಸ
ಕಾಶ್ಮೀರದಲ್ಲಿ ಹಿಂದೂ ಪಂಡಿತರಿಗೆ ಅವಮಾನ ಮಾಡಿದ, ಸೈನಿಕರ ಸಾವಿಗೆ ಕಾರಣವಾದ 370ನೇ ವಿಧಿಯನ್ನು ಬಿಜೆಪಿ ಸರಕಾರ ರದ್ದು ಮಾಡಿದೆ. ನಿನ್ನೆ ನಡೆದ ಭಯೋತ್ಪಾದಕರ ದಾಳಿ ಘಟನೆಯ ಮಾಹಿತಿ ತಿಳಿದ ಪ್ರಧಾನಿ ನರೇಂದ್ರ ಮೋದಿಯವರು ಸೌದಿ ಅರೇಬಿಯದಿಂದ ಧಾವಿಸಿ ಬಂದಿದ್ದಾರೆ ಎಂದು ವಿಜಯೇಂದ್ರ ಅವರು ವಿವರಿಸಿದರು.
ಹಿಂದೂಗಳ ಮಾರಣಹೋಮದ ವಿಚಾರ ತಿಳಿದಾಕ್ಷಣ ಅಮಿತ್ ಶಾ, ಅಧಿಕಾರಿಗಳನ್ನು ಕಳಿಸಿದ್ದಾರೆ. ನಾವೆಲ್ಲರೂ ಹಿಂದೂಗಳು ಮೊದಲು. ಆ ಜಾತಿ, ಈ ಜಾತಿ ಅಲ್ಲ; 28 ಜನರ ಹತ್ಯೆಗೆ ಪಾಕಿಸ್ತಾನ ಬೆಲೆ ತೆರಲೇಬೇಕು ಎಂದು ನುಡಿದರು. ಉಗ್ರರ ವಿರುದ್ಧ ಪ್ರಧಾನಿಯವರು ದಿಟ್ಟ ಕ್ರಮ ಕೈಗೊಳ್ಳಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪೆಟ್ರೋಲ್, ಸ್ಟಾಂಪ್ ಡ್ಯೂಟಿ ದರ ಏರಿಸಿದ್ದಾರೆ ಎಂದು ಖಂಡಿಸಿದರು. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ರೈತರು ಹೊಲಕ್ಕೆ ವಿದ್ಯುತ್ ಸಂಪರ್ಕ ಪಡೆಯಲು 25 ಸಾವಿರ ಕಟ್ಟಿದರೆ ಸಾಕಿತ್ತು. ಇವತ್ತು ಕಾಂಗ್ರೆಸ್ಸಿನ ಸಿದ್ದರಾಮಯ್ಯನವರ ಆಡಳಿತದಲ್ಲಿ 2.5 ಲಕ್ಷದಿಂದ 3 ಲಕ್ಷ ಕಟ್ಟಬೇಕಾಗಿದೆ ಎಂದು ಆಕ್ಷೇಪಿಸಿದರು. ಬಡವರ, ರೈತರ ಮೇಲೆ ಹೊರೆ ಆಗಿದೆ ಎಂದು ಟೀಕಿಸಿದರು.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರವು 6 ಸಾವಿರ ಹಾಗೂ ಯಡಿಯೂರಪ್ಪ ಅವರು 4 ಸಾವಿರ ಕೊಡುತ್ತಿದ್ದರು. ಅದನ್ನೂ ಈಗ ನಿಲ್ಲಿಸಿದ್ದಾರೆ. ಗ್ರಾಮೀಣ ಭಾಗದಲ್ಲಿ ಬಡವರು ರಕ್ತಪರೀಕ್ಷೆ ಮಾಡಿಸಿಕೊಳ್ಳಲು 3ರಿಂದ 4 ಪಟ್ಟು ಹೆಚ್ಚು ದರ ಕೊಡಬೇಕಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಹಾಲಿನ ಮೇಲೆ 9 ರೂ. ಹೆಚ್ಚಿಸಿದ್ದಾರೆ ಎಂದು ವಿವರಿಸಿದರು. ಪೆಟ್ರೋಲ್ ಮೇಲೆ 3 ರೂ, ಡೀಸೆಲ್ ಮೇಲೆ 5.50 ರೂ. ಹೆಚ್ಚಿಸಿದ್ದಾರೆ ಎಂದು ದೂರಿದರು.
ಜಾತಿ- ಜಾತಿಗಳ ನಡುವೆ ಕಂದಕ ನಿರ್ಮಿಸುವ ಕಾರ್ಯ
ಅಭಿವೃದ್ಧಿ ಕೆಲಸ ಕಾರ್ಯ ಶೂನ್ಯವಾಗಿದೆ. ಸಮಾಜ- ಸಮಾಜಗಳ ನಡುವೆ ಈ ಸರಕಾರ ವಿಷಬೀಜ ಬಿತ್ತುತ್ತಿದೆ. ಜಾತಿ- ಜಾತಿಗಳ ನಡುವೆ ಕಂದಕ ನಿರ್ಮಿಸುವ ಕಾರ್ಯವನ್ನು ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ ಮಾಡುತ್ತಿದೆ ಎಂದು ವಿಜಯೇಂದ್ರ ಅವರು ಟೀಕಿಸಿದರು.
ಈ ಸರಕಾರ ಅಧಿಕಾರಕ್ಕೆ ಬಂದು 2 ವರ್ಷವಾಗುತ್ತಿದ್ದು, ಅಭಿವೃದ್ಧಿ ಕಾರ್ಯಕ್ಕೆ ಯಾವುದೇ ಹಣ ನೀಡುತ್ತಿಲ್ಲ ಎಂದು ಆಕ್ಷೇಪಿಸಿದರು. ಬಿಜೆಪಿ ಸರಕಾರ ಇದ್ದಾಗ ಯಡಿಯೂರಪ್ಪ ಅವರು ಯಾದಗಿರಿ ಜಿಲ್ಲೆ ಘೋಷಿಸಿ ನೂರಾರು ಕೋಟಿ ಅಭಿವೃದ್ಧಿ ಮೊತ್ತ ನೀಡಿದ್ದಾರೆ ಎಂದು ವಿವರಿಸಿದರು.
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಬಿ. ಶ್ರೀರಾಮುಲು,ಮಾಜಿ ಸಚಿವ ನರಸಿಂಹ ನಾಯಕ ರಾಜುಗೌಡ,ಶಾಸಕ ದೊಡ್ಡಣ್ಣಗೌಡ ಪಾಟೀಲ, ಜಿಲ್ಲಾಧ್ಯಕ್ಷ ಬಸವರಾಜ ವಿಭೂತಿಹಳ್ಳಿ,ಬಿ.ಜಿ.ಪಾಟೀಲ,ಶಶೀಲ್ ನಮೋಶಿ,ರಾಜ್ಯ ಕಾರ್ಯದರ್ಶಿ ತಮ್ಮೇಶ್ ಗೌಡ, ಶರಣು ತಳ್ಳಿಕೇರಿ,ನಗರಸಭೆ ಅಧ್ಯಕ್ಷೆ ಕು.ಲಲಿತಾ ಅನಪುರ,
ರಾಚನಗೌಡ ಮುದ್ನಾಳ್, ಮಹೇಶ್ ರೆಡ್ಡಿ ಗೌಡ ಮುದ್ನಾಳ್, ನಾಗರತ್ನ ಕುಪ್ಪಿ, ಮಾಜಿ ಜಿಲ್ಲಾಧ್ಯಕ್ಷರಾದ ಅಮೀನ್ ರೆಡ್ಡಿ ಯಾಳಗಿ ಹಾಗೂ ಶರಣಭೂಪಾಲರೆಡ್ಡಿ, ದೇವಿಂದ್ರನಾಥ ನಾದ, ಹೆಚ್.ಸಿ ಪಾಟೀಲ್, ರಾಜಾ ಹನುಮಂತ ನಾಯಕ ತಾತಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರು ಕಾಮ ಹಾಗೂ ಪರಶುರಾಮ ಕುರಕುಂದಿ, ಜಿಲ್ಲಾ ವಕ್ತಾರ ಹಣಮಂತ ಇಟಗಿ, ಶ್ರೀಧರ ಸಾಹುಕಾರ, ಸುನೀತಾ ಚೌವ್ಹಾಣ್, ಡಾ.ಚಂದ್ರಶೇಖರ್ ಸುಬೇದಾರ್, ರಾಜಶೇಖರ ಕಾಡಂನೂರ, ಲಿಂಗಪ್ಪ ಹತ್ತಿಮನಿ, ಜಿಲ್ಲಾ ಪದಾಧಿಕಾರಿಗಳು, ಆರು ಮಂಡಲ ಅಧ್ಯಕ್ಷರು, ಎಲ್ಲಾ ಮೋರ್ಚಾದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸೇರಿ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದರು
