ಕೊಪ್ಪಳ : ಅತಿಥಿ ಉಪನ್ಯಾಸಕರನ್ನು ನೇಮಿಸಲು ಒತ್ತಾಯಿಸಿ ಜಿಲ್ಲೆಯ ಪ್ರಮುಖ ಸರ್ಕಾರಿ ಪದವಿ ಕಾಲೇಜುಗಳ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಎಐಡಿಎಸ್ಓ ರಾಜ್ಯ ಸಮಿತಿ ಸದಸ್ಯೆ ಸಿಂಧೂ.ಕೆ ಅವರು ,ತರಗತಿ ನಡೆಸದೆ ಪರೀಕ್ಷೆ ಬೇಡ ಎಂಬ ಘೋಷ ವಾಕ್ಯದೊಂದಿಗೆ ರಾಜ್ಯದಾದ್ಯಂತ ಹೋರಾಟ ನಡೆಸಲು ವಿದ್ಯಾರ್ಥಿಗಳು ಇಂದು ತರಗತಿ ಬಹಿಷ್ಕರಿಸಿದ್ದಾರೆ. ಅತಿಥಿ ಉಪನ್ಯಾಸಕರಿಲ್ಲದೇ ಒಂದೂ ತರಗತಿಯೂ ನಡೆದಿಲ್ಲ. ಆದರೂ ಸೆಮಿಸ್ಟರ್ ಪರೀಕ್ಷೆಗಳ ವೇಳಾಪಟ್ಟಿ ಮತ್ತು ಪರೀಕ್ಷಾ ಶುಲ್ಕದ ಸುತ್ತೋಲೆ ಹೊರಡಿಸಿರುವ ವಿವಿಗಳ ಧೋರಣೆ ಖಂಡನೀಯ. ಸರ್ಕಾರಿ ವಿವಿಗಳು ಖಾಸಗಿ ಕಾಲೇಜುಗಳಿಗೆ ಮಾತ್ರವೇ ಸೀಮಿತವೇ ಎಂಬ ಪ್ರಶ್ನೆ ಮೂಡುತ್ತಿದ್ದು, ಈ ಸಮಸ್ಯೆ ಪರಿಹಾರವಾಗುವವರೆಗೂ ನಮ್ಮ ಹೋರಾಟ ಹೀಗೆ ಮುಂದುವರೆಯಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ತರಗತಿಗಳನ್ನು ಬಹಿಷ್ಕರಿಸಿದ್ದ ಅನೇಕ ವಿದ್ಯಾರ್ಥಿಗಳು ಮಾತನಾಡಿ, ಈ ಕೂಡಲೇ ಅತಿಥಿ ಉಪನ್ಯಾಸಕರನ್ನು ನೇಮಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಶರಣು, ತಿರುಪತಿ, ಅಪ್ಪಾಜಿ, ವಿದ್ಯಾರ್ಥಿಗಳಾದ ಆಕಾಶ್ ಪರಶುರಾಮ್, ಸಾವಿತ್ರಿ, ದುರ್ಗಾ, ನಾಗರತ್ನ, ಗಂಗಾ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.