BREKING NEWS : “ವಿಜಯಪುರ|ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯ ನಟ, ಧಾರವಾಡ ರಂಗಾಯಣ ನಿರ್ದೇಶಕ ರಾಜು ತಾಳಿಕೋಟಿ ಇನ್ನಿಲ್ಲ.!”

By admin

“ವಿಜಯಪುರ|ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯ ನಟ, ಧಾರವಾಡ ರಂಗಾಯಣ ನಿರ್ದೇಶಕ ರಾಜು ತಾಳಿಕೋಟಿ ಇನ್ನಿಲ್ಲ.!

• ಸೆಕ್ಯುಲರ್‌ ವಾಯ್ಸ್‌ ನ್ಯೂಸ್‌ ವಿಜಯಪುರ:

ಹಾಸ್ಯನಟ, ಧಾರವಾಡ ರಂಗಾಯಣ ನಿರ್ದೇಶಕ, ಹಿರಿಯ ರಂಗಕರ್ಮಿ ರಾಜು ತಾಳಿಕೋಟೆ ಹೃದಯಾಘಾತದಿಂದ  ಇಂದು ಕೊನೆಯುಸಿರೆಳೆದಿದ್ದಾರೆ.

ಉಡುಪಿಯಲ್ಲಿ ಸಿನಿಮಾವೊಂದರ ಚಿತ್ರೀಕರಣ ಮುಗಿಸಿ ಕೋಣೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಹಾರ್ಟ್ ಅಟ್ಯಾಕ್ ಆಗಿದೆ. ಕೂಡಲೇ ಅವರನ್ನು ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು ಎಂದು ತಿಳಿದು ಬಂದಿದೆ.

ಶೈನ್ ಶೆಟ್ಟಿ ನಟನೆಯ ಹೊಸ ಸಿನಿಮಾದ ಶೂಟಿಂಗ್ ಸಲುವಾಗಿ ರಾಜು ತಾಳಿಕೋಟೆ ಅವರು ಉಡುಪಿಗೆ ಬಂದಿದ್ದರು. ಚಿತ್ರೀಕರಣ ಮುಗಿಸಿ ರಾತ್ರಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಈ ಹಿಂದೆಯೂ ರಾಜು ತಾಳಿಕೋಟೆ ಅವರಿಗೆ ಹೃದಯಾಘಾತ ಆಗಿತ್ತು. ಆಗ ಚಿಕಿತ್ಸೆ ನೀಡಿ ಸ್ಟಂಟ್ ಹಾಕಲಾಗಿತ್ತು. ಈಗ ಒತ್ತಡ ಜಾಸ್ತಿ ಆಗಿದ್ದರಿಂದ ಮತ್ತೆ ಹಾರ್ಟ್ ಅಟ್ಯಾಕ್ ಆಗಿರಬಹುದು. ವಿಜಯಪುರದಲ್ಲಿ ಅಂತ್ಯ ಸಂಸ್ಕಾರ ಮಾಡಲಾಗುವುದು ಎಂದು ಅವರ ಪುತ್ರ ತಿಳಿಸಿದ್ದಾರೆ.

ರಾಜು ತಾಳಿಕೋಟೆ ಅವರು ‘ಮನಸಾರೆ’, ‘ಪಂಚರಂಗಿ’, ‘ಲೈಫು ಇಷ್ಟೇನೇ’, ‘ರಾಜಧಾನಿ’, ‘ಅಲೆಮಾರಿ’, ‘ಮೈನಾ’, ‘ಟೋಪಿವಾಲಾ’ ಮುಂತಾದ ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದರು. ‘ಬಿಗ್ ಬಾಸ್ ಕನ್ನಡ ಸೀಸನ್ 7’ ರಿಯಾಲಿಟಿ ಶೋನಲ್ಲಿ ಅವರು ಸ್ಪರ್ಧಿಸಿದ್ದರು. ಕಿರುತೆರೆಯ ಕೆಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.