“ಗಂಗಾವತಿ | ಮೂಲಭೂತ ಸೌಲಭ್ಯ ಹಾಗೂ ಶಿಕ್ಷಕರ ನೇಮಕಾತಿಗೆ ಒತ್ತಾಯಿಸಿ ಎಸ್ ಎಫ್ ಐ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ”
• ಸೆಕ್ಯುಲರ್ ವಾಯ್ಸ್ ನ್ಯೂಸ್ ಗಂಗಾವತಿ :
ಗಂಗಾವತಿ ಕನಕಗಿರಿ ಮತ್ತು ಕಾರಟಗಿ ವಿದ್ಯಾರ್ಥಿಗಳ ಪರವಾಗಿ ಭಾರತ ವಿದ್ಯಾರ್ಥಿ ಫೆಡರೇಶನ್ ತಾಲೂಕಾ ಸಮಿತಿ ನೇತೃತ್ವದಲ್ಲಿ ಬುಧವಾರದಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಮುಂದೆ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಮೂಲಭೂತ ಸೌಲಭ್ಯ ಹಾಗೂ ಶಿಕ್ಷಕರ ನೇಮಕಾತಿಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿಯ ಅಧ್ಯಕ್ಷ ಶಿವಕುಮಾರ್ ಈಚನಾಳ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಸರ್ಕಾರಿ ಶಾಲೆಗಳ ಸ್ಥಿತಿಯನ್ನು ಗಮನಿಸಿದಾಗ ವಿದ್ಯಾರ್ಥಿಗಳಿಗೆ ಅಗತ್ಯ ಇರುವ ಮೂಲಭೂತ ಸೌಲಭ್ಯವನ್ನು ಕಲ್ಪಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಶಾಲಾ ಕಟ್ಟಡಗಳು ಯಾವುದೇ ಸಂದರ್ಭದಲ್ಲಿ ಕುಸಿದು ಬೀಳುವ ಹಂತವನ್ನು ತಲುಪಿವೆ. ವಿದ್ಯಾರ್ಥಿಗಳ ಭವಿಷ್ಯ ರೂಪಿಸಬೇಕಾದ ಶಿಕ್ಷಕರ ಕೊರತೆಯಿಂದಾಗಿ ಗುಣಮಟ್ಟದ ಶಿಕ್ಷಣ ಸೌಲಭ್ಯದಿಂದ ವಿದ್ಯಾರ್ಥಿಗಳು ವಂಚಿತರಾಗುತ್ತಿದ್ದಾರೆ ಎಂದು ಹೇಳಿದರು.
ಇನ್ನೂ ಖಾಸಗಿ ಶಿಕ್ಷಣ ಸಂಸ್ಥೆಗಳು ಆಂಗ್ಲ ಮಾಧ್ಯಮದ ಹೆಸರಿನಲ್ಲಿ ಅಧಿಕ ಡೊನೇಷನ್ ಪಡೆದು ಪಾಲಕರಿಗೆ ವಂಚಿಸುತ್ತಿದ್ದಾರೆ ಈ ಹಿನ್ನೆಲೆಯಲ್ಲಿ ಪ್ರಮುಖ ಏಳು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುವುದರ ಜೊತೆಗೆ ಡಿಡಿಪಿ ಐ ಆಗಮಿಸುವ ವರೆಗೆ ಅನಿರ್ದಿಷ್ಟ ಧರಣಿಯನ್ನು ಮುಂದುವರಿಸಲಾಗುವುದು ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಬಾಲಾಜಿ, ತಾಲೂಕ ಅಧ್ಯಕ್ಷ ನಾಗರಾಜ್ ,ಜಿಲ್ಲಾ ಉಪಾಧ್ಯಕ್ಷ ಹನುಮೇಶ್ ಎಂ ಶರೀಫ್ ಹುಸೇನಪ್ಪ ಮಂಜುನಾಥ್, ಬಸವರಾಜ್ ಸೇರಿದಂತೆ ಸಿಐಟಿಯು ಕೃಷಿ ಕೂಲಿ ಕಾರ್ಮಿಕರ ಸಂಘದ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.